ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ‌ ಆಗಲಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ನ. 24ರಂದು  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ನಾವು ಜನರನ್ನು ಮತ್ತು ಸಮಾಜವನ್ನು ಬೆಸೆಯುವ ಮೂಲಕ ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇವೆ. ನುಡಿದಂತೆ ನಡೆಯುತ್ತಿದ್ದೇವೆ. ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಿ ಮಾತು ಉಳಿಸಿಕೊಂಡಿದ್ದೇವೆ.
ಹೀಗಾಗಿ 2028 ರಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣ ಇದುವರೆಗೂ ತೆಗೆದಿಟ್ಟಿರುವುದು ಮಾತ್ರವಲ್ಲದೆ, ಇಷ್ಟೇ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು ಇಲ್ಲಿ ಉದ್ಘಾಟನೆಗೊಂಡ ಅಭಿವೃದ್ಧಿಯೂ ಸೇರಿದೆ.

ಸರ್ಕಾರದ ಬಳಿ ಹಣ ಇಲ್ಲ, ಖಜಾನೆ ಖಾಲಿ ಆಗಿದೆ ಎನ್ನುವ ಬಿಜೆಪಿಯ ಸುಳ್ಳು ಆರೋಪಗಳಿಗೆ ನಮ್ಮ‌ ಸರ್ಕಾರ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ಕೊಟ್ಟಿದೆ. ರಾಜ್ಯದ ಪ್ರತೀ ಕುಟುಂಬಗಳಿಗೂ ಪ್ರತೀ ತಿಂಗಳು ಸರ್ಕಾರದ ಹಣ ಮತ್ತು ಕಾರ್ಯಕ್ರಮಗಳು ತಲುಪುತ್ತಿವೆ.
ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಯಾವ ಗ್ಯಾರಂಟಿ ಯೋಜನೆಗಳೂ ನಿಲ್ಲುವುದಿಲ್ಲ. ಜೊತೆಗೆ ಸಣ್ಣ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಅಭಿವೃದ್ಧಿ ನಡೆಸುತ್ತಿದ್ದೇವೆ ಎಂದರು.