ಬಂಟ್ವಾಳ: ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ. ಹೇಳಿದರು.
ಅವರು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇಲ್ಲಿ ನಡೆದ 2024-25ನೇ ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ ಮತ್ತು ಲಲಿತ ಕಲಾ ಸಂಘಗಳ ವಾರ್ಷಿಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಆದರ್ಶವಿಲ್ಲದೆ ಬದುಕಿದರೆ ಬದುಕಿಗೆ ಅವಮಾನ, ಸಾಧನೆ ಇಲ್ಲದೆ ಬದುಕಿದರೆ ಸಾವಿಗೆ ಅವಮಾನ. ಸಾಧನೆಯೇ ಜೀವನದ ಗುರಿಯಾಗಬೇಕೆಂದು ಎಂದರು.
ಕಾರ್ಯಕ್ರಮದಲ್ಲಿ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಇಲ್ಲಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಹರಿಪ್ರಸಾದ್ ಮಾತನಾಡಿ ನಾಯಕತ್ವ ಗುಣ ವಿದ್ಯಾರ್ಥಿ ಜೀವನದಿಂದಲೇ ಮೈಗೂಡಿಸಿಕೊಳ್ಳಬೇಕು ಎಂದರು.
ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಇಲ್ಲಿನ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಸತೀಶ್ ಬಂಗೇರ, ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಹೇಮಲತಾ ಹಾಗೂ ಶಾಲಾ ನಾಯಕ ಅರ್ಪಣ್ ರೈ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ಸೃಷ್ಟಿ ಪೂಜಾರಿ ಸ್ವಾಗತಿಸಿ, ವಿದ್ಯಾರ್ಥಿ ಶಿರೋದಿತ್ ಬಿ ಶೆಟ್ಟಿ ವಂದಿಸಿದರು, ವೀಕ್ಷಿತಾ ಎನ್ ಮತ್ತು ಕುಮಾರಿ ಎಲ್ವೀನಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.