ನವದೆಹಲಿ: ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.
ಕರ್ನಾಟಕದಲ್ಲಿ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ ಅನುಷ್ಠಾನ ಅತ್ಯಗತ್ಯವಾಗಿದೆ. ಮಾರುಕಟ್ಟೆಯಲ್ಲಿನ ತೀವ್ರ ಬೆಲೆ ಕುಸಿತದಿಂದಾಗಿ ಕರ್ನಾಟಕದ ಅನೇಕ ಕೆಂಪು ಮೆಣಸಿನಕಾಯಿ ರೈತರು ಗಂಭೀರ ಸಮಸ್ಯೆ, ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುತ್ತಿದ್ದು, ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಮನವರಿಕೆ ಮಾಡಿದರು.
ಕರ್ನಾಟಕದ ಸಾವಿರಾರು ಸಣ್ಣ ಮತ್ತು ಅತಿ ಸಣ್ಣ ರೈತರು ಕೆಂಪು ಮೆಣಸಿನಕಾಯಿ ಕೃಷಿಯನ್ನು ಅವಲಂಬಿಸಿದ್ದಾರೆ ಮತ್ತು ಕೆಂಪು ಮೆಣಸಿನಕಾಯಿ ಪ್ರಸ್ತುತ ಮಾರುಕಟ್ಟೆ ಬೆಲೆ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಅನೇಕ ರೈತರನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದೆ. ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯಕ್ಕೆ ವಿಸ್ತರಿಸುವ ತುರ್ತು ಅವಶ್ಯಕತೆಯಿದ್ದು, ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದೆ ಎಂದು ಒತ್ತಾಯಿಸಿದರು.
ಕೃಷಿ ಸಚಿವರ ಭರವಸೆ: ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.