ಕಠ್ಮಂಡು: ಮೂವತ್ತು ವರ್ಷಗಳಲ್ಲೇ ಅತ್ಯಂತ ಭೀಕರವಾದ ಪ್ರವಾಹಕ್ಕೆ ನೇಪಾಳ (Nepal) ತತ್ತರಿಸಿಹೋಗಿದೆ. ಈ ನೈಸರ್ಗಿಕ ವಿಕೋಪದಲ್ಲಿ ಸಾವಿನ ಸಂಖ್ಯೆ 392ಕ್ಕೆ ತಲುಪಿದ್ದು, 1500ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ : ನೇಪಾಳ ಜಲಪ್ರಳಯಕ್ಕೆ ನಗರಗಳೇ ಸರ್ವನಾಶ: 300 ಭಾರತೀಯರು ಸೇರಿ ನೂರಾರು ಜನ ನಾಪತ್ತೆ

ಈವರೆಗೆ ಸೈನಿಕರು ಹಾಗೂ ರಕ್ಷಣಾ ಸಿಬ್ಬಂದಿ 800ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರೀ ಪ್ರವಾಹದ ರಭಸಕ್ಕೆ ಒಟ್ಟು 80ಕ್ಕೂ ಅಧಿಕ ಸೇತುವೆಗಳು (35 ಸಾಮಾನ್ಯ ಹಾಗೂ 45 ತೂಗುಸೇತುವೆಗಳು) ಕೊಚ್ಚಿಹೋಗಿವೆ. ಇದರೊಂದಿಗೆ ರಾಜಧಾನಿ ಕಠ್ಮಂಡುವನ್ನು ಸಂಪರ್ಕಿಸುವ ಮುಖ್ಯ ಹೆದ್ದಾರಿ ಸೇರಿದಂತೆ ನೂರಾರು ಕಿಲೋಮೀಟರ್ ರಸ್ತೆಗಳು ಜಲಸಮಾಧಿಯಾಗಿವೆ. ಪರಿಣಾಮವಾಗಿ ದೇಶದ ಪ್ರಮುಖ ಸಂಚಾರ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ನೇಪಾಳದ ಆಧುನಿಕ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ದುರಂತವಾಗಿ ದಾಖಲಾಗಿದೆ.

8 ಕನ್ನಡಿಗರು ನಾಪತ್ತೆ:
ನೇಪಾಳದಲ್ಲಿ ಉಂಟಾಗಿರುವ ಭೀಕರ ಪ್ರವಾಹದ ಅಲೆ ಕನ್ನಡಿಗರಿಗೂ ತಟ್ಟಿದ್ದು, ಅಲ್ಲಿ ಸಿಲುಕಿರುವ ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 

ಬೆಂಗಳೂರು ಮೂಲದ 8 ಮಂದಿ ನೇಪಾಳ ಪ್ರವಾಹದಲ್ಲಿ ಸಿಲುಕಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಅವರ ಸಂಪೂರ್ಣ ವಿವರಗಳು ಇನ್ನು ಲಭ್ಯವಾಗಬೇಕಿದೆ. ಈ ಹಿನ್ನೆಲೆ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ನೇಪಾಳದ ರಾಜಧಾನಿ ಕಠ್ಮಂಡುಗೆ ಹಿರಿಯ ಐಎಎಸ್/ಹಿರಿಯ ಅಧಿಕಾರಿಗಳನ್ನು ನೇರವಾಗಿ ಕಳುಹಿಸಲು ಸರ್ಕಾರ ನಿರ್ಧರಿಸಿದೆ.

ಸಂಕಷ್ಟದಲ್ಲಿರುವ ಕನ್ನಡಿಗರ ಕುಟುಂಬಗಳ ನೆರವಿಗಾಗಿ ಹಾಗೂ ತುರ್ತು ಮಾಹಿತಿಗಾಗಿ ರಾಜ್ಯ ಸರ್ಕಾರ ಈಗಾಗಲೇ ಸಹಾಯವಾಣಿಯನ್ನು ತೆರೆದಿದ್ದು, ಸಾರ್ವಜನಿಕರು 1070 ಅಥವಾ 080-22253707 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.