ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದ್ದು, ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಮೊದಲು ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಇದೀಗ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳಿಗೆ ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇಂದು ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಕೇರಳ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ.

ಉಳಿದಂತೆ ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್ನಿಂದ ಯೆಲ್ಲೋ ಅಲರ್ಟ್ಗೆ ಮರಳಿದೆ. ಇಂದಿನಿಂದ ಮುಂದಿನ ಮೂರ್ನಾಲ್ಕು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.